Thursday, October 15, 2009

ಮೌನ ಎಂಬ ಸಮೃದ್ಧ ಭಾಷೆ

ಚಿಕ್ಕವನಿದ್ದಾಗ ತುಂಬ ಮಾತನಾಡುತ್ತಿದ್ದೆ. 
ಎಷ್ಟು ಮಾತನಾಡುತ್ತಿದ್ದೆನೆಂದರೆ, ಒಮ್ಮೊಮ್ಮೆ ಏದುಸಿರು ಬರುತ್ತಿತ್ತು. ತುಂಬ ಮಾತನಾಡುತ್ತೀ ಎಂದು ಏಟು ಕೂಡ ತಿಂದಿದ್ದೇನೆ. ಆದರೂ ಮಾತು ನಿಲ್ಲುತ್ತಿರಲಿಲ್ಲ.

ಬಹುಶಃ ಹತ್ತನೇ ತರಗತಿಯ ಪರೀಕ್ಷೆಗಳ ನಂತರ ಇರಬೇಕು, ನನ್ನ ಮಾತು ಇದ್ದಕ್ಕಿದ್ದಂತೆ ಕಡಿಮೆಯಾಗತೊಡಗಿತು. ಪಿಯುಸಿ ಮುಗಿಯುವ ಹೊತ್ತಿಗೆ ಅದು ಎಷ್ಟು ಕಡಿಮೆಯಾಯಿತೆಂದರೆ, ಮಾತನಾಡಿದರೆ ನನ್ನ ಧ್ವನಿ ನನಗೇ ಅಪರಿಚಿತ ಅನಿಸುವಷ್ಟು.

ಈ ಸಮಯದಲ್ಲಿಯೇ ನನಗೆ ಓದುವ ಹುಚ್ಚು ಅಂಟಿಕೊಂಡಿದ್ದು. ಮೊದಲಿನಿಂದಲೂ ಸಿಕ್ಕಿದ್ದನ್ನು ಓದುವ ಹವ್ಯಾಸವಿತ್ತಾದರೂ, ಓದಲು ಪುಸ್ತಕಗಳೇ ಸಿಗುತ್ತಿರಲಿಲ್ಲ. ಹಳ್ಳಿಯಲ್ಲಿ ಪುಸ್ತಕಗಳನ್ನು ತರುವವರೂ ಕಡಿಮೆ. ಅಪ್ಪ ಮೊದಲಿನಿಂದಲೂ ಹಿಂದಿ ಕಾದಂಬರಿಪ್ರಿಯ. ನಮಗೋ ಹಿಂದಿ ತೀರಾ ದುಬಾರಿ. ಆದರೆ, ಡಿಗ್ರಿಗೆಂದು ಗದಗ್‌ ಸೇರಿದಾಗ ಕಾಲೇಜ್‌ ಹಾಗೂ ಸಾರ್ವಜನಿಕ ಗ್ರಂಥಾಲಯಗಳು ಮನಸ್ಸು ಸೆಳೆದವು. ಕ್ಲಾಸ್‌ ತಪ್ಪಿಸಿ ಕತೆ-ಕಾದಂಬರಿ ಓದುತ್ತ ಕೂತುಬಿಡುತ್ತಿದ್ದೆ.

ಹೀಗಾಗಿ ಮಾತು ಇನ್ನಷ್ಟು ಕಡಿಮೆಯಾಯಿತು. ಮಾತಿನ ಜಾಗವನ್ನು ಓದು ತುಂಬಿತು.

ಆದರೆ, ಓದಿನ ಜಾಗವನ್ನು ಇದುವರೆಗೆ ಬೇರೆ ಯಾವುದೂ ತುಂಬಲು ಆಗಿಲ್ಲ. ಅದು ಕೊಟ್ಟ ವಿಶಿಷ್ಟ ಖುಷಿ ಬೇರೆ ಯಾವುದರಿಂದಲೂ ಸಿಕ್ಕಿಲ್ಲ. ಇವತ್ತಿಗೂ ಅದು ಹಾಗೇ ಇದೆ.

ಮೌನದಿಂದ ನನ್ನ ವಿಚಾರಗಳನ್ನು ಗಮನಿಸುವುದು ಸುಲಭವಾಯಿತು. ನನ್ನ ವಿಚಾರಗಳನ್ನು ಹಿಂಬಾಲಿಸುತ್ತ ಹಗಲುಕನಸು ಕಾಣುವುದೂ ಜೋರಾಯಿತು. ಇವೆರಡೂ ಇನ್ನೇನು ನನ್ನ ವ್ಯಕ್ತಿತ್ವವನ್ನೇ ಹಾಳು ಮಾಡುತ್ತವೆ ಎಂಬಷ್ಟು ಅತಿಯಾದಾಗ ನಾನು ಬರೆಯಲು ಶುರು ಮಾಡಿದೆ. ನನ್ನ ದಿನಚರಿ ಬರವಣಿಗೆ ಶುರುವಾಗಿದ್ದು ಹೀಗೆ.

ಇದನ್ನೆಲ್ಲ ಏಕೆ ಹೇಳುತ್ತಿದ್ದೇನೆಂದರೆ, ಯಾವುದನ್ನು ಅತಿ ಅಂತ ಅಂದುಕೊಂಡಿರುತ್ತೇವೆಯೋ, ಅದಕ್ಕೆ ಪರಿಹಾರವೂ ಅದರ ಅಕ್ಕಪಕ್ಕದಲ್ಲೆಲ್ಲೋ ಇರುತ್ತದೆ. ಒಂದಿಷ್ಟು ವ್ಯವಧಾನ, ಆಸಕ್ತಿ ಇದ್ದರೆ ಕಾಣುತ್ತದೆ. ತಾಕುತ್ತದೆ. ಗಮನ ಸೆಳೆಯುತ್ತದೆ. ಹೊಸದರ ಹುಡುಕಾಟ, ಅದನ್ನು ತಿಳಿಯುವ ಖುಷಿ ನಮ್ಮ ದೋಷವನ್ನು ತಿದ್ದುತ್ತ ಹೋಗುತ್ತವೆ. ಮನಸ್ಸಿನೊಂದಿಗೆ ಮಾತನಾಡಿಕೊಳ್ಳುತ್ತ ಹಲವಾರು ವಿಷಯಗಳು ನನಗೆ ಸ್ಪಷ್ಟವಾಗಿವೆ. ಇನ್ನೊಬ್ಬರ ವಿಷಯಗಳನ್ನು ತಿಳಿದುಕೊಳ್ಳುವ ಗುಣವನ್ನು ಬೆಳೆಸಿವೆ. ನೋವು ಕಾಡಿದಾಗ, ಸಮಸ್ಯೆಗಳು ಎದುರು ನಿಂತು ಕಂಗೆಡಿಸಿದಾಗ ನಾನು ಮೌನವಾಗಿ ಓದುತ್ತ, ಬರೆಯುತ್ತ, ಹಾಡು ಕೇಳುತ್ತ ಗುಣವಾಗುತ್ತ ಹೋಗುತ್ತೇನೆ.

ಮೌನ ಜಗತ್ತಿನ ಸಮೃದ್ಧ ಭಾಷೆಯಂತೆ. ಅಷ್ಟೇ ಅಲ್ಲ, ಎಷ್ಟು ಬಳಸಿದರೂ ಖರ್ಚಾಗದ ಶಕ್ತಿಯೂ ಹೌದು. ಮನುಷ್ಯನನ್ನು ಬಿಟ್ಟು ಇತರ ಜೀವಜಗತ್ತು ಪರಸ್ಪರ ಸಂಭಾಷಿಸುವುದು ಬಹುತೇಕ ಹೀಗೇ ಅಲ್ಲವೆ? ತನ್ನ ಪಾಡಿಗೆ ತಾನು ನಿಂತಿರುವ ಮರ, ಅರಳುವ ಹೂ, ಮೇಯುವ ಹಸು, ಹಾರುವ ಹಕ್ಕಿ, ತಮ್ಮ ನೆಮ್ಮದಿಯಲ್ಲಿ ತಾವಿರುವುದನ್ನು ನೋಡಿದಾಗ, ಮೌನ ವರ ಎಂದು ಹಲವಾರು ಬಾರಿ ಅನ್ನಿಸಿದೆ.

ಈ ವಿವೇಕ ನನ್ನ ಉದ್ವೇಗವನ್ನು ಕಡಿಮೆ ಮಾಡುತ್ತದೆ. ಅಹಂ ಕುಗ್ಗಿಸುತ್ತದೆ. ಮಾತಿನಾಚೆಯ ಜಗತ್ತಿನ ಸೊಗಸಿನತ್ತ ಸೆಳೆಯುತ್ತದೆ. ಅದನ್ನು ನೆನದಾಗೆಲ್ಲ, ಬೆರಗಿನಿಂದ ಮನಸ್ಸು ಮೂಕವಾಗುತ್ತದೆ. ಮೌನ ಮಾತಾಗುತ್ತದೆ. ನಾನು ಅದನ್ನು ಕೇಳಿಸಿಕೊಳ್ಳುತ್ತ ಸುಮ್ಮನೇ ಕೂತುಬಿಡುತ್ತೇನೆ-

ಈ ಅಪರಾತ್ರಿ ಕೂತಂತೆ!

- ಚಾಮರಾಜ ಸವಡಿ

2 comments:

  1. "ಯಾವುದನ್ನು ಅತಿ ಅಂತ ಅಂದುಕೊಂಡಿರುತ್ತೇವೆಯೋ, ಅದಕ್ಕೆ ಪರಿಹಾರವೂ ಅದರ ಅಕ್ಕಪಕ್ಕದಲ್ಲೆಲ್ಲೋ ಇರುತ್ತದೆ. ಒಂದಿಷ್ಟು ವ್ಯವಧಾನ, ಆಸಕ್ತಿ ಇದ್ದರೆ ಕಾಣುತ್ತದೆ. ತಾಕುತ್ತದೆ. ಗಮನ ಸೆಳೆಯುತ್ತದೆ. "

    ನಿಜ , ಸವಡಿಯವರೇ
    ನನ್ನ ಓದು ಅತಿಯಾಗಿದೆ ಎಂಬುವ ತಿಳುವಳಿಕೆಯೂ ನನಗೆ ಬಂದಿದ್ದು ಜೀನ್ ಪಾಲ್ ಸಾರ್ತೃ ಪುಸ್ತಕದ ಕನ್ನಡ ಅನುವಾದ- ಪದಚರಿತದಿಂದಲೇ ... !!!!
    --- ಶ್ರೀಕಾಂತ ಮಿಶ್ರಿಕೋಟಿ

    ReplyDelete
  2. ಸಾರ್ತ್ರೆ ಓದಿಲ್ಲ ಶ್ರೀಕಾಂತ್‌. ಗೊತ್ತಾಗಿದ್ದೆಲ್ಲ ಚಿಕ್ಕ ಚಿಕ್ಕ ಅನುಭವಗಳಿಂದ. ನಮ್ಮ ಅನುಭವಗಳೇ ನಮ್ಮ ಅನಿಸಿಕೆಗಳನ್ನು ರೂಪಿಸುವುದು, ಅಲ್ವೆ?

    ReplyDelete